
ತಂಬಾಕು ನಿಯಂತ್ರಣ ಕಾರ್ಯಾಚರಣೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಲಿ…ಅಧಿಕಾರಿಗಳಿಗೆ ಡಿಸಿ ಸೂಚನೆ
- MysoreTV10 Kannada Exclusive
- February 1, 2023
- No Comment
- 114
ಮೈಸೂರು,ಫೆ01,Tv10 ಕನ್ನಡ
ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ತಂಬಾಕು ನಿಯಂತ್ರಣ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಸುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ನಿಯಮಿತವಾಗಿ ದಾಳಿ ಕೈಗೊಂಡು, ಕೋಟ್ಪಾ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಮೂಲಕ ಯಶಸ್ವಿಗೊಳಿಸಬೇಕು. ನಮ್ಮ ಆರೋಗ್ಯ ನೋಡಿಕೊಳ್ಳುವ ರೀತಿಯಲ್ಲಿಯೇ ಸಾರ್ವಜನಿಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಪೊಲೀಸ್, ಶಿಕ್ಷಣ, ಆರೋಗ್ಯ, ಮಹಾನಗರ ಪಾಲಿಕೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಸೇವನೆಯ ವಿರುದ್ಧ ನಿರಂತರ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ತಂಬಾಕು ನಿಯಂತ್ರಣ ಕಾಯ್ದೆ ಕುರಿತು ಪ್ರಚಾರ ಫಲಕ ಮತ್ತು ಜಾಹಿರಾತುಗಳ ಮೂಲಕ ಪ್ರದರ್ಶಿಸಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಂಬಾಕು ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.ಶಾಲಾಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮತ್ತು ಮಾರಾಟ ನಿಷೇಧವೆಂಬ ನಾಮಫಲಕವನ್ನು ಎಲ್ಲಾ ಶಾಲಾ ಕಾಲೇಜುಗಳು ಕಡ್ಡಾಯವಾಗಿ ಅಳವಡಿಸಬೇಕು. ಹಾಗೂ ವರ್ತಕರು/ಚಿಲ್ಲರೆ ವ್ಯಾಪಾರಿಗಳು ಶಾಲಾ ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ಮಾರಾಟ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಸೆಕ್ಷನ್ 4 ಕಾಯಿದೆಯಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟವನ್ನು ನಿಷೇಧಿಸಿದೆ. ಈ ಕಾಯಿದೆ ಅಡಿಯಲ್ಲಿ 1,218 ಪ್ರಕರಣಗಳು ದಾಖಲಾಗಿದ್ದು 1,34,820 ರೂ. ಗಳನ್ನು ಸಂಗ್ರಹಿಸಲಾಗಿದೆ. ಸೆಕ್ಷನ್ 6 ‘ಎ’ ರಲ್ಲಿ 482 ಪ್ರಕರಣಗಳು ದಾಖಲಾಗಿವೆ ಹಾಗೂ 52,300 ರೂ. ಗಳನ್ನು ಸಂಗ್ರಹಿಸಲಾಗಿದೆ. ಸೆಕ್ಷನ್ 6 ‘ಬಿ’ ಯ ಅಡಿಯಲ್ಲಿ 35 ಪ್ರಕರಣಗಳು ದಾಖಲಾಗಿದ್ದು 4,100 ರೂ. ಗಳನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ 2022 ರ ಏಪ್ರಿಲ್ ನಿಂದ 2022 ರ ಡಿಸೆಂಬರ್ ವರೆಗೆ 48 ರೈಡ್ ಗಳು ನಡೆದಿದ್ದು 1,735 ಪ್ರಕರಣಗಳು ದಾಖಲಾಗಿವೆ. ಒಟ್ಟು 1,91,220 ರೂ. ಗಳು ಸಂಗ್ರಹಗೊಂಡಿದೆಯೆಂದು ಕೋಟ್ಪಾ ಎನ್ಫೋರ್ಸ್ಮೆಂಟ್ ತಿಳಿಸಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಸಾದ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…