ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ
- TV10 Kannada Exclusive
- August 19, 2026
- No Comment
- 3
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ
ಬೆಂಗಳೂರು,ಆ19,Tv10 ಕನ್ನಡ
ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ, ರಾಜೋಚಿತವಾಗಿ ಬೀಳ್ಕೊಡುಗೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.
ಈ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಖಂಡ್ರೆ, 750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಅಭಿಮನ್ಯುವಿಗೆ ನಾಡಿನಾದ್ಯಂತ ದೊಡ್ಡ ಅಭಿಮಾನಿ ಬಳಗವಿದೆ ಎಂದು ತಿಳಿಸಿದ್ದಾರೆ.
ಅಭಿಮನ್ಯುವನ್ನು ಏಕಾಏಕಿ ದಸರಾ ಮಹೋತ್ಸವದಿಂದ ಹೊರಗಿಡುವ ಬದಲು ನಿಶಾನೆ ಆನೆಯಾಗಿ ಬಳಸಿಕೊಂಡು ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಬೇಕು ಎಂದು ಅವರು ಕೋರಿದ್ದಾರೆ.
ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾನೆ. ಅಲ್ಲದೆ, ಆರು ಬಾರಿ ಚಿನ್ನದಂಬಾರಿ ಹೊತ್ತು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿದ್ದಾನೆ ಎಂದು ಖಂಡ್ರೆ ಹೇಳಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆ ವಿಜಯದಶಮಿ ಜಂಬೂಸವಾರಿ. ದಸರಾ ಆನೆಗಳೊಂದಿಗೆ ರಾಜ್ಯದ ಜನತೆಗೆ ಭಾವನಾತ್ಮಕ ನಂಟಿದ್ದು, ಚಿನ್ನದ ಅಂಬಾರಿ ಹೊರುವ ಆನೆಗಳ ಬಗ್ಗೆ ವಿಶೇಷ ಅಭಿಮಾನವಿದೆ. ಹೀಗಾಗಿ ಅಭಿಮನ್ಯುವನ್ನು ದಸರಾ ಮಹೋತ್ಸವದಿಂದ ಕೈಬಿಟ್ಟಿರುವುದು ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಿಂದೆ ಅರ್ಜುನ 60 ವರ್ಷ ತುಂಬಿದ ಬಳಿಕವೂ ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದ, ಅದೇ ರೀತಿ ಬಲರಾಮ ಕೂಡ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ. ಈ ಹಿನ್ನೆಲೆಯಲ್ಲಿ ಅಭಿಮನ್ಯುವಿಗೂ ಇದೇ ಗೌರವ ನೀಡಿ, ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿ ಗೌರವಯುತ ಬೀಳ್ಕೊಡುಗೆ ನೀಡಬೇಕು ಎಂದು ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ…